Breaking
4 Jun 2025, Wed

ಬೆಟ್ಟದಾಸನಪುರದಲ್ಲಿ ಶ್ರೀ ತಿಮ್ಮರಾಯಸ್ವಾಮಿ ಹಾಗೂ ಕಾಶಿ ವಿಶ್ವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ

ಬೆಂಗಳೂರು ದಕ್ಷಿಣ ಕ್ಷೇತ್ರದ ಬೆಟ್ಟದಾಸನಪುರ ಗ್ರಾಮದಲ್ಲಿ ಶ್ರೀ ಕೋಟೆ ತಿಮ್ಮರಾಯಸ್ವಾಮಿ ಹಾಗೂ ಕಾಶಿ ವಿಶ್ವೇಶ್ವರ ಸ್ವಾಮಿಯ ಅದ್ದೂರಿ ಜಾತ್ರಾ ಮಹೋತ್ಸವ ಆಯೋಜನೆ ಮಾಡಲಾಗಿತ್ತು

ವಿಜೃಂಭಣೆಯಿಂದ ನಡೆದ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರಿಂದ ಗ್ರಾಮ ದೇವತೆಗಳ ಪಲ್ಲಕ್ಕಿ ಉತ್ಸವ ಆಯೋಜನೆ ಮಾಡಲಾಗಿತ್ತು. ಗ್ರಾಮದೇವತೆಗಳನ್ನ ಪಲ್ಲಕ್ಕಿಯಲ್ಲಿ ಕೂರಿಸಿ ಊರಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.

ಗ್ರಾಮದ ಮಹಿಳೆಯರು ಆರತಿಗಳನ್ನು ಹೊತ್ತು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ವೀರಗಾಸೆ ಕುಣಿತ, ಕೀಲು ಕುದುರೆ, ಸೇರಿದಂತೆ ಸಂಗೀತ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು

ಈ ಕುರಿತು ಮಾತನಾಡಿದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ನಾರಾಯಣಸ್ವಾಮಿ ಬೆಟ್ಟದಾಸನಪುರ ಗ್ರಾಮದಲ್ಲಿ ಈ ಬಾರಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ಕೈಗೊಳ್ಳಲಾಗಿದೆ. ಜಾತಿ ಭೇದ ಮರೆತು ಗ್ರಾಮಸ್ಥರೆಲ್ಲ ಒಟ್ಟಾಗಿ ಸೇರಿ ಶ್ರೀ ತಿಮ್ಮರಾಯಸ್ವಾಮಿ ಹಾಗೂ ಕಾಶಿ ವಿಶ್ವೇಶ್ವರ ಸ್ವಾಮಿಯ ಜಾತ್ರೆಯನ್ನು ನಡೆಸಿದ್ದಾರೆ. ಜೊತೆಗೆ ಗ್ರಾಮ ದೇವತೆಗಳ ಪಲ್ಲಕ್ಕಿ ಉತ್ಸವವನ್ನು ಮುಖ್ಯರಸ್ತೆಗಳಲ್ಲಿ ಮೆರವಣಿಗೆ ಮಾಡಿ ಭಕ್ತಾದಿಗಳಿಗೆ ಅನ್ನದಾಸೋಹ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ. ಎಲ್ಲರ ಸಹಕಾರದಿಂದ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದರು

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಾಮರಾಜು ಮಾತನಾಡಿ ಪ್ರತಿ ವರ್ಷ ಬೆಟ್ಟದಾಸನಪುರ ಗ್ರಾಮದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಬಾಂಧವರು ಒಟ್ಟಾಗಿ ಸೇರಿ ಹಬ್ಬದ ರೀತಿಯಲ್ಲಿ ಜಾತ್ರಾ ಮಹೋತ್ಸವ ನಡೆಸುತ್ತಾರೆ. ಗ್ರಾಮದಲ್ಲಿ ಪ್ರತಿಯೊಬ್ಬರಲ್ಲೂ ಸಹಬಾಳ್ವೆ ಹಾಗೂ ಭಾವೈಕ್ಯತೆಯನ್ನ ಮೂಡಿಸುವ ಉದ್ದೇಶದಿಂದ ಜಾತ್ರೆಯನ್ನು ನಡೆಸಲಾಗುತ್ತಿದೆ. ಮಹಿಳೆಯರು ಗ್ರಾಮದೇವತೆಗಳ ದೀಪದ ಆರತಿಯನ್ನು ಹೊತ್ತು ಗ್ರಾಮದೇವತೆಗಳಿಗೆ ಪೂಜಿ ಸಲ್ಲಿಸಿ ಗ್ರಾಮದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲಿ ಎಂದು ಬೇಡಿಕೊಂಡಿದ್ದಾರೆ. ಅದೇ ರೀತಿ ದೊಡ್ಡ ತೊಗೂರು ಪಟ್ಟಣ ಪಂಚಾಯಿತಿ ಹಾಗೂ ಪೊಲೀಸರ ಸಹಕಾರದೊಂದಿಗೆ ಈ ಬಾರಿ ಬೆಟ್ಟದಾಸನಪುರ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದರು.

Leave a Reply