ಆನೇಕಲ್ ತಾಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ಸಂಪನ್ಮೂಲಗಳ ಅಡಿಯಲ್ಲಿ 5 ಕೋಟಿ 13 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆನೇಕಲ್ ಶಾಸಕ ಶಿವಣ್ಣ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದರು. ಹೆನ್ನಾಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವರ್ಗ1 ಹಾಗೂ 15 ನೇ ಹಣಕಾಸು ಯೋಜನೆಯಡಿ ಸ್ತ್ರೀ ಶಕ್ತಿ ಭವನ, ಗ್ರಂಥಾಲಯ ಕಟ್ಟಡ, ವಿಎಸ್ಎಸ್ಎನ್ ಕಟ್ಟಡ, ಅಂಗನವಾಡಿ ಕಟ್ಟಡ ಹಾಗೂ ಹೈಮಾಸ್ಕ್ ದೀಪಗಳನ್ನ ನಿರ್ಮಿಸಲು ಇಂದು ಚಾಲನೆ ನೀಡಲಾಗಿದೆ.
ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆನ್ನಾಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ಸಂಪನ್ಮೂಲಗಳನ್ನು ಕ್ರೂಢೀಕರಿಸಿ ರೈತರಿಗೆ ಹಸುಗಳು, ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ , ಅಡುಗೆ ಅನಿಲ ಸಿಲಿಂಡರ್, ತ್ರಿಚಕ್ರ ವಾಹನ , ಹಾಗೂ 350 ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಇಂತಹ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ದಿ ಸಾಧ್ಯವಾಗಲಿದೆ ಎಂದು ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಆನೇಕಲ್ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿಗಳನ್ನ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ತರಲು ಒತ್ತಾಯ ಕೇಳಿಬಂದಿದೆ. ಶಾಸಕರ ಜೊತೆ ಚರ್ಚೆ ನಡೆಸಿ ಈ ಬಗ್ಗೆ ಕ್ರಮ ಜರುಗಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೆನ್ನಾಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಇಂದು ಚಾಲನೆ ನೀಡಲಾಗಿದೆ. ಪಂಚಾಯತಿ ವ್ಯಾಪ್ತಿಯ 900 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಇಂದು ಸವಲತ್ತುಗಳನ್ನು ವಿತರಣೆ ಮಾಡಲಾಗುತ್ತದೆ . ಆಮೂಲಕ ರಾಜ್ಯದಲ್ಲೇ ಹೆನ್ನಾಗರ ಪಂಚಾಯಿತಿ ಮಾದರಿ ಪಂಚಾಯಿತಿಯಾಗಿ ಹೊರಹೊಮ್ಮುತ್ತಿದೆ. ನಮ್ಮ ಸರ್ಕಾರ ಚುನಾವಣೆ ಸಮಯದಲ್ಲಿ ನೀಡಿದ್ದ ಬಹುತೇಕ ಆಶ್ವಾಸನೆಗಳನ್ನ ಈಡೇರಿಸಲಾಗಿದೆ ಎಂದರು.
ಬಳಿಕ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಮಸ್ವಾಮಿ ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಉತ್ತಮ ಕಾರ್ಯಕ್ರಮ ರೂಪಿಸಲಾಗಿದೆ. ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ರವರ ಸಮ್ಮುಖದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಫಲಾನುಭವಿಗಳಿಗೆ 75 ಹಸುಗಳು, 150 ಟೈಲರಿಂಗ್ ಮೆಷಿನ್, 125 ಗ್ಯಾಸ್ ಸಿಲಿಂಡರ್, 75 ಲ್ಯಾಪ್ಟಾಪ್ , ಹಾಲಿಗೆ ಲೀಟರ್ ಗೆ ತಲಾ 5 ರೂಪಾಯಿ ಸಹಾಯ ಧನ ಹಾಗೂ 350 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡುವ ಮೂಲಕ ಸ್ವಂತ ಸಂಪನ್ಮೂಲದಡಿಯಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಹೆನ್ನಾಗರ ಪಂಚಾಯಿತಿ ರಾಜ್ಯದಲ್ಲೇ ಮಾದರಿ ಪಂಚಾಯಿತಿಯಾಗಿ ಹೊರಹೊಮ್ಮಿದೆ. ಎಂದು ಸಂತಸ ಹಂಚಿಕೊಂಡರು.